ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ 6 ಬಾರಿ ಗೆಲುವು ದಾಖಲಿಸಿದ ಹೆಗ್ಗಳಿಕೆ ಜಗದೀಶ್ ಶೆಟ್ಟರ್ ಅವರಿಗೆ ಇದೆ. ಬಿಜೆಪಿಯಲ್ಲಿ ಸಚಿವರಾಗಿ, ಒಮ್ಮೆ ಸಿಎಂ ಕೂಡಾ ಆಗಿದ್ದ ಜಗದೀಶ್ ಶೆಟ್ಟರ್ಗೆ ಈ ಬಾರಿ ಬಿಜೆಪಿ ಟಿಕೆಟ್ ನಿರಾಕರಿಸಲಾಗಿತ್ತು. ಹೀಗಾಗಿ, ಸಿಡಿದೆದ್ದು ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಅವರಿಗೆ, ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ತಮ್ಮದೇ ಲಿಂಗಾಯತ ಸಮುದಾಯದ ಬಲ ಇದೆ. ಯಾಕಂದ್ರೆ ಈ ಕ್ಷೇತ್ರದಲ್ಲಿ ಲಿಂಗಾಯತರೇ ನಿರ್ಣಾಯಕರು. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಒಟ್ಟು ಎರಡೂವರೆ ಲಕ್ಷ ಮತದಾರರ ಪೈಕಿ ಲಿಂಗಾಯತರೇ ಸುಮಾರು 75 ಸಾವಿರದಷ್ಟು ಇದ್ದಾರೆ. ಹೀಗಾಗಿ, ಈ ಕ್ಷೇತ್ರದಲ್ಲಿ ಎಲ್ಲ ಪಕ್ಷಗಳೂ ಲಿಂಗಾಯತರಿಗೇ ಟಿಕೆಟ್ ನೀಡುತ್ತವೆ. ಈ ಬಾರಿ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಲಿರುವ ಶೆಟ್ಟರ್ ಅವರಿಗೆ ಬಿಜೆಪಿಯ ಎದುರಾಳಿ ಯಾರು ಅನ್ನೋದು ಇನ್ನೂ ಕನ್ಫರ್ಮ್ ಆಗಿಲ್ಲ. ಆದ್ರೆ, ಸತತ ಗೆಲುವಿನ ಸರದಾರ ಎಂದೇ ಹೆಸರಾಗಿರುವ ಜಗದೀಶ್ ಶೆಟ್ಟರ್, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮತ್ತೆ ಗೆಲ್ಲುವ ಹುಮ್ಮಸ್ಸಿನಲ್ಲಿದ್ದಾರೆ. ಆದ್ರೆ, ಕಾರ್ಯಕರ್ತರಿಗೆ ಟಿಕೆಟ್ ನೀಡ್ತೇವೆ ಎಂದು ಹೇಳುತ್ತಿರುವ ಬಿಜೆಪಿ ಯಾವ ರೀತಿಯ ತಂತ್ರಗಾರಿಕೆ ನಡೆಸುತ್ತೆ ಅನ್ನೋದು ಕುತೂಹಲ ಕೆರಳಿಸಿದೆ.
